ಬೆಂಗಳೂರು : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಇಂದು ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಇನ್ನು ಮೋದಿ ಸಂಪುಟ 3.0 ದಲ್ಲಿ ಹೆಚ್ ಡಿ ಕುಮಾರಸ್ವಾಮಿ ಅವರು ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಮೊನ್ನೆ ಅಧಿಕಾರ ಸ್ವೀಕರಿಸಿದ್ದಾರೆ.
ಇಂದು ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಅವರನ್ನು ಭೇಟಿಯಾಗಿ ಕುಮಾರಸ್ವಾಮಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಸಲ್ಲಿಸುವ ಮೊದಲು ಅವರು ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಇನ್ನು ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಡೆಯಲಿದ್ದು ಇಲ್ಲಿಂದ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ನಿಖಿಲ್ ಈ ಬಗ್ಗೆ ಸಣ್ಣ ಸುಳಿವೊಂದನ್ನು ಕೊಟ್ಟಿದ್ದಾರೆ.
ಇನ್ನು ನಿನ್ನೆ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು ನಿರಂತರವಾಗಿ ನನ್ನ ವಿರುದ್ಧ ಪಿತೂರಿ ನಡೆಯುತ್ತಲೇ ಇದೆ. ನಾನು ಮಾತ್ರವಲ್ಲದೇ ನಮ್ಮ ಕುಟುಂಬವನ್ನು ರಾಜಕಾರಣದಲ್ಲಿ ಮುಗಿಸಲು ಕೂಡ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಆದರ ಯಾವುದು ಶಾಶ್ವತ ಎಲ್ಲ, ನಾನು ಎಲ್ಲದ್ದಕ್ಕೂ ತಯಾರಿದ್ದೇನೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ನಾನು ಮಂತ್ರಿಯಾಗಿರೋದನ್ನ ಅರಗಿಸಿಕೊಳ್ಳಲು ಆಗ್ತಿಲ್ಲ.ಕೇಂದ್ರ ಮಂತ್ರಿಯಾದ್ಮೇಲೂ ನನ್ನ ವಿರುದ್ಧ ಷಡ್ಯಂತ್ರ ನಡೀತಿದೆ. ನನ್ನನ್ನು ಜೈಲಿಗೆ ಹಾಕಲು ನನ್ನ ಯಾವುದಾದರೂ ಹಳೆ ಕೇಸ್ ಗಳು ಇವೆಯೋ ಏನೋ ಎಂದು ಹುಡುಕಾಡುತ್ತಿದ್ದಾರೆ. ಇವರಿಗೆ ರಾಜ್ಯವನ್ನು ಹೇಗೆ ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಅನ್ನೋ ಬಗ್ಗೆ ಯಾವುದೇ ಚಿಂತೆಯಿಲ್ಲ. ಬದಲಾಗಿ ಕುಮಾರಸ್ವಾಮಿಯನ್ನು ಹೇಗೆ ಮುಗಿಸಬೇಕು ಎಂದು ಪ್ಲ್ಯಾನ್ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರವಾದ ಆರೋಪವನ್ನು ಮಾಡಿದ್ದಾರೆ.
ಇನ್ನು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾದ ಬಗ್ಗೆ ಮಾತನಾಡಿದ ಅವರು ಈಗಾಗಲೇ ಹೆಚ್ ಡಿ ದೇವೇಗೌಡ ಕುಟುಂಬದ ವರ್ಚಸ್ಸನ್ನು ಹಾಳು ಮಾಡಿ ಆಯಿತು.ಈಗ ಯಡಿಯೂರಪ್ಪ ಅವರನ್ನು ಮಗಿಸಲು ಹೊರಟ್ಟಿದ್ದಾರೆ .ಬಿಎಸ್ ವೈ ವಿರುದ್ಧವೂ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ.82ರ ವಯಸ್ಸಿನಲ್ಲಿ ಯಡಿಯೂರಪ್ಪ ಹಾಗೆ ಮಾಡಲು ಸಾಧ್ಯನಾ.? ಎಂದು ಪ್ರಶ್ನಿಸಿದ್ದಾರೆ.ಯಡಿಯೂರಪ್ಪ ಅವರ ವಿಚಾರದಲ್ಲಿ ರಾಜ್ಯ ಸರ್ಕಾರ ತುಂಬಾ ಸಂಶಯಾಸ್ಪದವಾಗಿ ನಡೆದುಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಇದರ ಬೆನ್ನಲ್ಲೇ ಮಂಡ್ಯ ಜೂನ್ 16 ಭಾನುವಾರ ಮಂಡ್ಯದಲ್ಲಿ ಕುಮಾರಸ್ವಾಮಿ ಕೇಂದ್ರ ಸಚಿವರಾದ ಹಿನ್ನೆಲೆ ಹಮ್ಮಿಕೊಂಡಿದ್ದ ಕೃತಜ್ಞತಾ ಸಮಾವೇಸವನ್ನು ರದ್ದುಗೊಳಿಸಲಾಗಿದೆ.ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಕಾನೂನು ಸಂಕಷ್ಟದಲ್ಲಿ ಸಿಲುಕಿರುವ ಈ ಸಂದರ್ಭದಲ್ಲಿ ಸಮಾವೇಶ ಮಾಡೋದು ಬೇಡ ಎಂಬ ಕಾರಣಕ್ಕೆ ಸದ್ಯಕ್ಕೆ ಸಮಾವೇಶವನ್ನು ಮುಂದೂಡಿಕೆ ಮಾಡಲಾಗಿದೆ. ನಿನ್ನೆಯಷ್ಟೇ ಈ ಕಾರ್ಯಕ್ರಮದ ಬಗ್ಗೆ ಮಂಡ್ಯದಲ್ಲಿ ಜೆಡಿಎಸ್ ನಾಯಕರು ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದರು.