ಬೆಂಗಳೂರು: ಬೆಳಗ್ಗೆ ಇಡ್ಲಿ, ಮಧ್ಯಾಹ್ನ ನಾಟಿ ಕೋಳಿ, ಡಿನ್ನರ್ ಮೀಟಿಂಗ್ ಗೆ ಬೆಳ್ಳುಳ್ಳಿ ಕಬಾಬ್ ಇದರಿಂದ ಜನರಿಗೆ ಏನ್ ಸಂದೇಶ ಕೊಡ್ತೀರಾ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರದಲ್ಲಿ ಬಡವರಿಗೆ ಆರೋಗ್ಯ ಸೇವೆಗಳು ಸಿಗುತ್ತಿಲ್ಲ, ರಾಜ್ಯಾದ್ಯಂತ 7 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಮುಚ್ಚಿದ್ದು ಮಕ್ಕಳ ಶಿಕ್ಷಣಕ್ಕೆ ಆಪತ್ತು ಬಂದಿದೆ ನಿಖಿಲ್ ಕುಮಾರಸ್ವಾಮಿ ಅವರು ಆರೋಪಿಸಿದರು.ಬೆಂಗಳೂರಿನಲ್ಲಿ ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು; ಬ್ರೇಕ್ಫಾಸ್ಟ್, ಡಿನ್ನರ್ ಮೀಟಿಂಗ್ ಮಾಡ್ತಾ ಹೋದರೆ ಜನರಿಗೆ ಯಾವ ಸಂದೇಶ ಕೊಡ್ತೀರಾ? ಬ್ರೇಕ್ ಫಾಸ್ಟ್ಗೆ ಇಡ್ಲಿ, ಮಧ್ಯಾಹ್ನ ನಾಟಿ ಕೋಳಿ, ಡಿನ್ನರ್ಗೆ ಬೆಳ್ಳುಳ್ಳಿ ಕಬಾಬ್ ಬರುತ್ತೆನೋ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಪಕ್ಷದಲ್ಲಿ ಯಾವುದು ಸರಿಯಿಲ್ಲ. ಸರಿ ಇದ್ದರೆ ಆಡಳಿತದಲ್ಲಿ ತೋರಿಸಿ. ಅದು ಬಿಟ್ಟು ಈ ಬ್ರೇಕ್ಫಾಸ್ಟ್ ಮೀಟಿಂಗ್, ಡಿನ್ನರ್ ಮೀಟಿಂಗ್ ಯಾಕೆ ಮಾಡಬೇಕು. ರಾಜ್ಯದಲ್ಲಿ ಉಪಹಾರ ಇಲಾಖೆ ಮಾತ್ರ ಸಕ್ರಿಯವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಅರೋಗ್ಯ ಇಲಾಖೆಯಲ್ಲಿ ಗರ್ಭಿಣಿಯರು ಸೇರಿ ಮಕ್ಕಳು ಎಷ್ಟು ಬಲಿಯಾದರು. ಅರೋಗ್ಯ ಇಲಾಖೆ ರಾಜ್ಯದಲ್ಲಿ ಸಂಪೂರ್ಣ ಕುಸಿದಿದೆ. ಅರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ವೈಫಲ್ಯವಾಗಿದೆ. ರಾಜ್ಯದಲ್ಲಿ ಸರ್ಕಾರಿ ಶಾಲೆ ಮುಚ್ಚುತ್ತಿವೆ. ಶಿಕ್ಷಕರ ನೇಮಕಾತಿ ಆಗ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು 2.5 ವರ್ಷ ಆಗಿದೆ.136ಕ್ಕೂ ಹೆಚ್ಚು ಶಾಸಕರಿದ್ದಾರೆ. ಗ್ಯಾರಂಟಿಗಳು ಪ್ರತಿ ತಿಂಗಳು ಸಮರ್ಪಕವಾಗಿ ಕೊಡ್ತಿಲ್ಲ. ಚುನಾವಣೆ ಹತ್ತಿರ ಬಂದರೆ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡ್ತಾರೆ. ಸರ್ಕಾರದ ಹಣ ಚುನಾವಣೆಗೆ ಬಳಸ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಈ ಸರ್ಕಾರಕ್ಕೆ 15 ಸಾವಿರ ಗುಂಡಿ ಮುಚ್ಚುವ ಯೋಗ್ಯತೆ ಇಲ್ಲ. 500-600 ಜನ ಗುಂಡಿಗೆ ಬಿದ್ದು ಸತ್ತಿದ್ದಾರೆ. ಇದರ ಹೊಣೆ ಸರ್ಕಾರವೇ ತೆಗೆದುಕೊಳ್ಳಬೇಕು. ಬೆಂಗಳೂರು ನಗರ ಹೆಚ್ಚಿನ ಆದಾಯ ಕೊಡುತ್ತದೆ. ಕಂಪನಿ ಮಾಲೀಕರು ಸಮಸ್ಯೆ ಬಗ್ಗೆ ಮಾತಾಡುತ್ತಾರೆ. ಬೆಂಗಳೂರಿನಲ್ಲಿ ರಸ್ತೆ ಯಾವುದು? ಪುಟ್ಪಾಥ್ ಯಾವುದು ಗೊತ್ತಿಲ್ಲ. ಇದು ಸರ್ಕಾರದ ಪರಿಸ್ಥಿತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಾರು ಯಾವಾಗ ಬ್ರದರ್ ಆಗುತ್ತಾರೋ, ಯಾವಾಗ ಕ್ಯಾನ್ಸಲ್ ಆಗುತ್ತೋ ಗೊತ್ತಿಲ್ಲ. ಕಾಂಗ್ರೆಸ್ನಲ್ಲಿ ಯಾರಿಗೆ ಸಹಿ ಹಾಕಬೇಕು ಅಂತ ಒಳಗೆ ನಡೆಯುತ್ತಿದೆ. ಸಹಿ ಹಾಕೋಕೆ ಎ,ಬಿ,ಸಿ ಟೀಂ ಅಂತ ಆಗಿದೆ. ಕಾಂಗ್ರೆಸ್ ಹೈಕಮಾಂಡ್ ಇದ್ದರೆ ಇದನ್ನ ಸರಿ ಮಾಡಲಿ ಎಂದು ಸಿಎಂ-ಡಿಸಿಎಂ ಬ್ರದರ್ಸ್ ಹೇಳಿಕೆಗೆ ಟಾಂಗ್ ನೀಡಿದರು.











