ಮನೆ Latest News ಎಚ್.ವೈ.ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಉಮೇಶ್ ಮೇಟಿ ಅವರನ್ನು ಗೆಲ್ಲಿಸಲೇಬೇಕು: ಮತದಾರರಿಗೆ ಸಿಎಂ ಸಿದ್ದರಾಮಯ್ಯ...

ಎಚ್.ವೈ.ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಉಮೇಶ್ ಮೇಟಿ ಅವರನ್ನು ಗೆಲ್ಲಿಸಲೇಬೇಕು: ಮತದಾರರಿಗೆ ಸಿಎಂ ಸಿದ್ದರಾಮಯ್ಯ ಕರೆ

0

 

ಬಾಗಲಕೋಟೆ: ಎಚ್.ವೈ.ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಉಮೇಶ್ ಮೇಟಿ ಅವರನ್ನು ಗೆಲ್ಲಿಸಲೇಬೇಕು ಎಂದು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಕರೆ ಕೊಟ್ಟಿದ್ದಾರೆ. ಬಾಗಲಕೋಟೆಗೆ ಮೆಡಿಕಲ್ ಕಾಲೇಜು ಬರುತ್ತಿರುವುದು ಮೇಟಿಯವರ ಶ್ರಮದ ಫಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಾಗಲಕೋಟೆ ಉಪ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಸುತಗುಂಡಾರ, ನಾಯನೇಗಲಿ ಸೇರಿ ಸುತ್ತ ಮುತ್ತಲ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು ಮೇಟಿ ಅವರ ನಾಲ್ವರೂ ಮಕ್ಕಳು ಟಿಕೆಟ್ ಕೇಳಿದ್ದರು. ಆದರೆ, ಯಾರಿಗೇ ಕೊಟ್ಟರೂ ಒಟ್ಟಿಗೇ ಕೆಲಸ ಮಾಡುವ ಭರವಸೆ ನೀಡಿದರು. ಕಾಂಗ್ರೆಸ್ ಪದ್ಧತಿಯಂತೆ  ಉಮೇಶ್ ಮೇಟಿ ಅವರಿಗೆ ಟಿಕೆಟ್ ಕೊಟ್ಟಿದ್ದೇವೆ. ಆದ್ದರಿಂದ ಇವರನ್ನು ಬೆಂಬಲಿಸಿ, ಗೆಲ್ಲಿಸಿ ಕಳುಹಿಸಿ ಎಂದರು.

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಆಲಮಟ್ಟಿ ವಿಚಾರದಲ್ಲಿ ಜನವಿರೋಧಿ ನಿಲುವು ಹೊಂದಿದೆ. ಹದಿಮೂರು ವರ್ಷಗಳಿಂದ ಗೆಜೆಟ್ ನೋಟಿಫಿಕೇಶನ್ ಕೂಡ ಮಾಡಲಿಲ್ಲ. ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗಲೂ ಭೂ ಪರಿಹಾರ ಘೋಷಿಸಿದರೂ ಹಣ ನೀಡಲಿಲ್ಲ. ನಾನು ಮುಖ್ಯಮಂತ್ರಿಯಾಗಿ ಎಕರೆ ನೀರಾವರಿ ಜಮೀನಿಗೆ 40ಲಕ್ಷ, ಒಣ ಭೂಮಿಗೆ 30 ಲಕ್ಷ ರೂ ಪರಿಹಾರ ಕೊಡುವ ತೀರ್ಮಾನ ಮಾಡಿ ಕೆಲಸ ಪ್ರಾರಂಭ ಮಾಡಿದ್ದು ಮೂರು ವರ್ಷದಲ್ಲಿ ಪರಿಹಾರ ಕೊಡುತ್ತೇವೆ ಎಂದು ಭರವಸೆ ನೀಡಿದರು.

ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಎಚ್.ವೈ.ಮೇಟಿಯವರ ಒತ್ತಾಯದಂತೆ ಬಾಗಲಕೋಟೆಗೆ ಮೆಡಿಕಲ್ ಕಾಲೇಜು ತರಲು ಶಂಕುಸ್ಥಾಪನೆ ಮಾಡಿದ್ದೇವೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮತ್ತು ಟ್ರಾಮಾ ಸೆಂಟರನ್ನೂ ನಾವು ಮಾಡುತ್ತೇವೆ. ನುಡಿದಂತೆ ಮಾಡುವ ಸರ್ಕಾರ ನಮ್ಮದು ಎಂದರು.

ಬಿಜೆಪಿಯವರು ನುಡಿದಂತೆ ನಡೆಯಲಿಲ್ಲ. ಒಂದೇ ಒಂದು ರೂಪಾಯಿ ರೈತರ ಸಾಲ ಮನ್ನಾ ಮಾಡಲಿಲ್ಲ. ಕೋವಿಡ್ ನಿಂದ ಬಳಲಿದ್ದ ರಾಜ್ಯದ ಜನತೆಗೆ ಅನುಕೂಲ ಮಾಡಿಕೊಡಲು ಐದು ಗ್ಯಾರಂಟಿಗಳನ್ನು ತಂದು ಜನರಿಗೆ ನೆರವಾಗಿದ್ದು ನಮ್ಮ ಸರ್ಕಾರ ಎಂದರು.

ಕೇಂದ್ರದ ಬಿಜೆಪಿ ಸರ್ಕಾರ ಕಬ್ಬು ಬಳೆಗೆ ರೈತರ ಬೇಡಿಕೆಯಷ್ಟು ಬೆಂಬಲ ಬೆಲೆ ನೀಡದಿದ್ದಾಗ ನಾನು ರೈತ ಸಂಘಟನೆಗಳು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ನಡೆಸಿ 200 ರೂ ಹೆಚ್ಚು ಮಾಡಿದೆವು. ಎಚ್.ವೈ.ಮೇಟಿಯವರು ಜನರ ಕೈಗೆ ಸಿಗುತ್ತಿದ್ದರು. ಅಹಿಂದ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸುತ್ತಿದ್ದರು. ಆದರೆ ಅಧಿಕಾರದಲ್ಲಿದ್ದಾಗ ಜನರಿಗೆ ಸ್ಪಂದಿಸದೆ, ಈಗ ನಮ್ಮ ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಯವರಿಗೆ ಮತ ಕೇಳುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ನಾವು ಪ್ರತೀ ವರ್ಷ 52 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯದ ಜನರ ಜೇಬಿಗೆ ಹಾಕುತ್ತಲೇ ಅಭಿವೃದ್ಧಿ ಕೆಲಸವನ್ನೂ ಮಾಡುತ್ತಿದ್ದೇವೆ. ಬಿಜೆಪಿಯವರು ಕಳ್ಳೆತ್ತುಗಳು. ಗೇಯುವ ಎತ್ತಿಗೆ ತಾನೆ ಮೇವು ಹಾಕೋದು, ಹಾಗೆಯೇ ಕೆಲಸ ಮಾಡಿದ ನಮಗೆ ಕೂಲಿ ಕೊಡಿ ಎಂದರು.ಎಚ್.ವೈ.ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಉಮೇಶ್ ಮೇಟಿ ಅವರನ್ನು ಗೆಲ್ಲಿಸಲೇಬೇಕು ಎಂದು ಕರೆ ನೀಡಿದರು.