ಮನೆ Latest News ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ; ಹೆಚ್.ಡಿ. ದೇವೇಗೌಡರ ಘೋಷಣೆ

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ; ಹೆಚ್.ಡಿ. ದೇವೇಗೌಡರ ಘೋಷಣೆ

0

ಬೆಂಗಳೂರು ; ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು, ಈ ದಂಧೆಯ ವಿರುದ್ಧ ಹೋರಾಟಕ್ಕೆ ಧುಮುಕುವುದಾಗಿ ಘೋಷಿಸಿದರು.

ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಹತ್ವದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾಜಿ ಪ್ರಧಾನಿಗಳು ಮಾತನಾಡಿದರು.ರೈತರ ಭೂಮಿಯನ್ನು ಕಿತ್ತುಕೊಂಡು ದಂಧೆ ಮಾಡಲು ಈ ಸರ್ಕಾರ ಹೊರಟಿದೆ. ಒಬ್ಬರು ‘ರೈತರು ಹೊಡೆದರೆ ಹೊಡೆಸಿಕೊಳ್ಳುವೆ’ ಎಂದು ಹೇಳಿದ್ದಾರೆ. ಮೊದಲು ಅವರು ಹೋಗಿ ರೈತರಿಂದ ಹೊಡೆಸಿಕೊಂಡು ಬರಲಿ, ಆಮೇಲೆ ನಾನು ಹೋಗಿ ಮಾತನಾಡುತ್ತೇನೆ ಎಂದು ಮಾಜಿ ಪ್ರಧಾನಿಗಳು ಗುಡುಗಿದರು.

ದೇವೇಗೌಡರು ಈ ಹಿಂದೆ ಸಭೆಯಲ್ಲಿ ಅಳುತ್ತಿದ್ದರು ಎಂದು ಕೆಲವರು ವ್ಯಂಗ್ಯ ಮಾಡುತ್ತಿದ್ದರು. ಆದರೆ ಈ ವ್ಯವಸ್ಥೆಯನ್ನು ನೋಡಿ ನಾನು ನಗುತ್ತಿದ್ದೇನೆ. ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಸ್ನೇಹಿತರು ಮತ್ತು ಹಳೆಯ ಸಹೋದ್ಯೋಗಿ. ಜೊತೆಯಲ್ಲಿ ಕೆಲಸ ಮಾಡಿದ್ದೇವೆ. ಆದರೆ ಇಲ್ಲಿ ನಡೆಯುತ್ತಿರುವುದು ಯಾರಿಗೂ ಕಾಣದಿರುವುದು ನನಗೆ ಅತೀವ ನೋವು ತಂದಿದೆ ಎಂದು ಮಾಜಿ ಪ್ರಧಾನಿಗಳು ಬೇಸರ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿ ಆಗಿದ್ದಾರೆ. ಇವತ್ತು ನಾನು ಒಂದು ಇಂಗ್ಲೀಷ್ ಪೇಪರ್ ನೋಡಿದೆ. ಕುಮಾರಸ್ವಾಮಿಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ಲ ಎಂದು ಒಬ್ಬ ವ್ಯಕ್ತಿ ಹೇಳಿರುವ ವರದಿಯನ್ನು ಗಮನಿಸಿದೆ. ಕುಮಾರಸ್ವಾಮಿ ಮಾಡಿದ ಬಿಡದಿ ಟೌನ್ಶಿಪ್ ಅನ್ನು ನಾನು ಮಾಡುತ್ತಿದ್ದೇನೆ ಎಂದು ಆ ವ್ಯಕ್ತಿ ಹೇಳಿದ್ದಾರೆ. ಆಗ ಕುಮಾರಸ್ವಾಮಿ ಮಾಡಲು ಹೊರಟಿದ್ದು ಏನು? ಈ ವ್ಯಕ್ತಿ ಈಗ ಮಾಡುತ್ತಿರುವ ದಂಧೆ ಏನು ಎಂಬುದು ಜನರಿಗೆ ಅರ್ಥವಾಗಿದೆ. ಅದರ ವಿರುದ್ಧ ನಾನು ಹೋರಾಟ ಮಾಡುತ್ತೇನೆ ಎಂದು ದೇವೇಗೌಡರು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು ನಗರದ ಮೇಲೆ ಹೆಚ್ಚು ಒತ್ತಡ ಆಗುತ್ತದೆ ಎಂದು ಕುಮಾರಸ್ವಾಮಿ ಐದು ಟೌನ್ ಶಿಪ್ ಗಳನ್ನು ಮಾಡಲು ಹೊರಟಿದ್ದರು. ಆಗ ಕಾಂಗ್ರೆಸ್ ಪಕ್ಷದ ನಾಯಕರು ದೊಡ್ಡ ಅಪಪ್ರಚಾರ ನಡೆಸಿ ಕುಮಾರಸ್ವಾಮಿಯವರು ಭೂಮಿಯನ್ನು ಹೊಡೆಯಲು ಹೊರಟಿದ್ದಾರೆ ಎಂದು ಸತ್ಯಶೋಧನ ಸಮಿತಿ ರಚಿಸಿ ತನಿಖೆಯನ್ನು ಮಾಡಿದರು. ಅವರ ಸತ್ಯಶೋಧನ ಸಮಿತಿ ವರದಿಯಲ್ಲಿ ಯಾವ ಸತ್ಯ ಹೊರಗೆ ಬಂತು ದೇವರೇ ಬಲ್ಲರು ಎಂದು ಮಾಜಿ ಪ್ರಧಾನಿಗಳು ವ್ಯಂಗ್ಯವಾಡಿದರು.

ಅಂದು ಜನರು ವಿರೋಧ ಮಾಡಿದ್ದಕ್ಕೆ ಕುಮಾರಸ್ವಾಮಿಯವರು ಐದು ಟೌನ್ ಶಿಪ್ ಯೋಜನೆಗಳನ್ನು ಕೈಬಿಟ್ಟರು. ಈಗಲೂ ಕೂಡ ಬಿಡದಿ ಟೌನ್ ಶಿಪ್ ಯೋಜನೆಗೆ ಜನರ ಆಕ್ರೋಶ, ವಿರೋಧ ಇದೆ. ಹೀಗಾಗಿ ಯೋಜನೆಯನ್ನು ತಕ್ಷಣವೇ ಕೈಬಿಡಬೇಕು ಎನ್ನುವುದು ನನ್ನ ಆಗ್ರಹವಾಗಿದೆ ಎಂದು ದೇವೇಗೌಡರು ಹೇಳಿದರು.

ಈಗ ಬೆಂಗಳೂರು ಜವಾಬ್ದಾರಿ ಹಾಗೂ ನೀರಾವರಿ ಜವಾಬ್ದಾರಿಯನ್ನು ಒಬ್ಬರೇ ವಹಿಸಿಕೊಂಡಿದ್ದಾರೆ. ಅದರ ಜೊತೆಗೆ ರಾಷ್ಟ್ರೀಯ ಪಕ್ಷದ ಜವಾಬ್ದಾರಿಯನ್ನು ಕೂಡ ಅವರೇ ಹೊತ್ತುಕೊಂಡಿದ್ದಾರೆ. ಏನೋ ಮುಖ್ಯಮಂತ್ರಿ ಆಗಬೇಕೆಂದು ಒಡಂಬಡಿಕೆ ಆಗಿದೆಯಂತೆ. ನಿಮ್ಮಗಳ ಮುಂದೆ ಮನೋರಂಜನೆ ಮಾಡುತ್ತಿದ್ದಾರೆ. ಬಿಡದಿಯ ರೈತರು ಕಣ್ಣೀರಿನಲ್ಲಿ ಕೈ ತೊಡೆಯುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯ ಅವರನ್ನು ನೇರವಾಗಿ ಪ್ರಶ್ನಿಸಿದ ಮಾಜಿ ಪ್ರಧಾನಿಗಳು; ಸಿದ್ದರಾಮಯ್ಯನವರೇ, ನೀವು ನನ್ನ ಜೊತೆ ಕೆಲಸ ಮಾಡಿದ್ದೀರಿ. ನಿಮ್ಮ ಸಾಮಾಜಿಕ ನ್ಯಾಯದ ಮಾತಿನ ಬಗ್ಗೆ ನನಗೂ ಅರಿವಿದೆ. ಬೆಂಗಳೂರು ಸುತ್ತಮುತ್ತ ಸುಮಾರು 20,000 ಎಕರೆ ಭೂಮಿ ಯಾರ ಹೆಸರಿನಲ್ಲಿ ಇದೆ ಎಂಬುದನ್ನು ತನಿಖೆ ಮಾಡಿ ಎಂದು ಈಗಾಗಲೇ ಪತ್ರ ಬರೆದಿದ್ದೇನೆ. ಸಿದ್ದರಾಮಯ್ಯನವರೇ ಬೆಂಗಳೂರು ನಗರದ ಹೊಣೆ ಹೊತ್ತಿರುವವರ ಒತ್ತಡಕ್ಕೆ ಮಣಿದು ಜನರ ಸಮಸ್ಯೆಯನ್ನು ನೀವು ಕೇಳುತ್ತಿಲ್ಲ. ಬಿಡದಿ ರೈತರ ಸಮಸ್ಯೆಯನ್ನು ಯಾರಾದರೂ ಹೋಗಿ ಕೇಳಿದ್ದೀರಾ ಎಂದು ದೇವೇಗೌಡರು ಪ್ರಶ್ನಿಸಿದರು.

ಟೌನ್ ಶಿಪ್ ಹೆಸರಿನಲ್ಲಿ ಫಲವತ್ತಾದ ಭೂಮಿಯನ್ನು ಹೊಡೆಯಲು ಹೊರಟಿದ್ದಾರೆ. ಭೂಮಿಯನ್ನು ಕಿತ್ತುಕೊಂಡು ಯಾರಿಗೆ ಕೊಡಲು ಹೊರಟಿದ್ದಾರೆ ಎಂಬುದನ್ನು ಸರ್ಕಾರ ಹೇಳಬೇಕು. ಭಾಗದಲ್ಲಿ ರೈತರು ದೊಡ್ಡ ಮಟ್ಟದ ಹೈನುಗಾರಿಕೆ, ತೋಟಗಾರಿಕೆ ಮಾಡುತ್ತಿದ್ದಾರೆ. ದೊಡ್ಡ ಪ್ರಮಾಣದಲ್ಲಿ ರೈತರು ನಿತ್ಯವೂ ಡೇರಿಗೆ ಹಾಲನ್ನು ನೀಡುತ್ತಿದ್ದಾರೆ. ಹಿಂದೆ ಕುಮಾರಸ್ವಾಮಿ ಅವರು 250 ಕೋಟಿ ವೆಚ್ಚದಲ್ಲಿ ನೀರಾವರಿ ಯೋಜನೆ ಮಾಡಿ ಈ ಭಾಗಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಇಂತಹ ನೀರಾವರಿ ಜಾಗವನ್ನು ಕಿತ್ತುಕೊಳ್ಳಲು ನಿಮ್ಮ ಪಕ್ಷದ ಅಧ್ಯಕ್ಷರು ಹೊರಟಿದ್ದಾರೆ. ನೀವು ನನ್ನ ಜೊತೆ ಕೆಲಸ ಮಾಡಿದ್ದೀರಿ. ಬಡವರು ಹಿಂದುಳಿದವರ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡಿದ್ದೀರಿ. ನೀವು ಅದರ ಬಗ್ಗೆ ನಿರ್ಧಾರ ಕೈಗೊಳ್ಳುವ ಸಮಯ ಇದಾಗಿದೆ. ಬೆಂಗಳೂರು ಹೊಣೆಗಾರಿಕೆ ಗೊತ್ತಿರುವ ವ್ಯಕ್ತಿಯ ಒತ್ತಡಕ್ಕೆ ಮಣಿದು ಜನಸಾಮಾನ್ಯರಿಗೆ ಅನ್ಯಾಯ ಮಾಡಬೇಡಿ. ಬಿಡದಿ ರೈತರು ಕಣ್ಣೀರು ಹಾಕುತ್ತಿದ್ದಾರೆ ಎಂದು ದೇವೇಗೌಡರು ಹೇಳಿದರು.

ಕುಮಾರಸ್ವಾಮಿ ಮಾಡಿದ್ದನ್ನು ನಾನು ಮುಂದುವರಿಸುತ್ತೇನೆ ಎನ್ನುತ್ತಾರೆ ಆ ವ್ಯಕ್ತಿ. ಜನರಿಂದ ವಿರೋಧ ಬಂದಿದ್ದಕ್ಕೆ ಅವರು ನಿಲ್ಲಿಸಿದರು. ಅದನ್ನೇ ಈ ವ್ಯಕ್ತಿ ಕೂಡ ಮಾಡಬೇಕಲ್ಲವೇ? ಜನರಿಂದ ತೀವ್ರ ವಿರೋಧ ಬಂದರು ನಾನು ಟೌನ್‌ಶಿಪ್ ಮಾಡಿ ತೀರುತ್ತೇನೆ ಎಂದು ಹಠ ಮಾಡುತ್ತಿದ್ದಾರೆ. ಬಗ್ಗೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ. ಇವತ್ತಿನಿಂದ ನನ್ನ ಹೋರಾಟ ಆರಂಭವಾಗಿದೆ. ಬೆಂಗಳೂರು ಸುತ್ತಮುತ್ತ ಬಡವರ ಜಮೀನನ್ನು ಕಿತ್ತುಕೊಳ್ಳುವ ಶಕ್ತಿಗಳನ್ನು ಮಟ್ಟ ಹಾಕಬೇಕಿದೆ. ಬಿಡಿಎ ಸೇರಿದಂತೆ ಎಲ್ಲೆಲ್ಲಿ ಅಕ್ರಮ ನಡೆದಿದೆಯೋ ಅಲ್ಲೆಲ್ಲ ನಾನು ಹೋರಾಟ ನಡೆಸುತ್ತೇನೆ. ಈ ಬಗ್ಗೆ ಮುಖ್ಯಮಂತ್ರಿಗೆ ಬರೆದಿರುವ ಪತ್ರದಲ್ಲಿ ಸ್ಪಷ್ಟವಾಗಿ ತಿಳಿಸಿದ್ದೇನೆ ಎಂದು ಅವರು ಪ್ರಶ್ನೆ ಒಂದಕ್ಕೆ ಉತ್ತರಿಸಿದರು.

ಬಿಡದಿಯ ರೈತರ ಪರಿಸ್ಥಿತಿಯನ್ನು ಒಮ್ಮೆ ನೀವೇ ಖುದ್ದಾಗಿ ನೋಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ ದೇವೇಗೌಡರು; ನಾನು ಬರುತ್ತೇನೆ, ನೀವು ಬನ್ನಿ. ಸ್ಥಳಕ್ಕೆ ಭೇಟಿ ನೀಡೋಣ. ಈವರೆಗೂ ಸ್ಥಳೀಯ ಶಾಸಕರು ತಹಸೀಲ್ದಾರರು ಜಿಲ್ಲಾಧಿಕಾರಿಗಳು ಆ ಜನರ ಸಮಸ್ಯೆಯನ್ನು ಕೇಳಿಲ್ಲ. ಇಲ್ಲಿ ದಂಧೆ ನಡೆಯುತ್ತಿದೆ. ರೈತರ ಭೂಮಿಯನ್ನು ಕಿತ್ತುಕೊಂಡು ದಂಧೆ ಮಾಡುತ್ತಿದ್ದಾರೆ. ಕನಕಪುರದಲ್ಲಿ ಎಷ್ಟು ಜಮೀನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂಬ ಬಗ್ಗೆ ನನ್ನ ಬಳಿ ಮಾಹಿತಿ ಇದೆ ಎಂದು ಯಾರೊಬ್ಬರ ಹೆಸರು ಹೇಳದೆಯೇ ಮಾಜಿ ಪ್ರಧಾನಿಗಳು ವಾಗ್ದಾಳಿ ನಡೆಸಿದರು. ಮಾಧ್ಯಮಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ, ಮಾಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಂಜುನಾಥ್ ಸೇರಿ ಬಿಡದಿ ಭಾಗದ ಅನೇಕ ರೈತರು ಉಪಸ್ಥಿತರಿದ್ದರು.