ಮನೆ Latest News 12 ರಾಷ್ಟ್ರಮಟ್ಟದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

12 ರಾಷ್ಟ್ರಮಟ್ಟದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

0

ಬೆಂಗಳೂರು: ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆದ್ದು ರಾಜ್ಯದ ಹಿರಿಮೆ ಹೆಚ್ಚಿಸಿದ 12 ಕ್ರೀಡಾಪಟುಗಳಿಗೆ ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ವಿತರಿಸಿದರು.

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಈ ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ 2016-17ರ ಅವಧಿಯಲ್ಲಿ ಹುಬ್ಬಳ್ಳಿಯಲ್ಲಿ ಒಲಂಪಿಕ್ಸ್‌ ಅಸೋಸಿಯೇಶನ್‌ ವತಿಯಿಂದ ಆಯೋಜಿಸಲಾಗಿದ್ದ ಕ್ರೀಡಾಕೂಟದ ಸಂದರ್ಭದಲ್ಲಿ, ಒಲಂಪಿಕ್ಸ್‌, ಏಶ್ಯಾಡ್‌ ಮತ್ತು ಕಾಮನ್‌ವೆಲ್ತ್‌ನಂತಹ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡುವ ಕ್ರೀಡಾಳುಗಳಿಗೆ ಸರ್ಕಾರಿ ನೌಕರಿ ಒದಗಿಸುವುದಾಗಿ ಘೋಷಣೆ ಮಾಡಿದ್ದೆ. ಸರ್ಕಾರ ಬದಲಾದ ಬಳಿಕ ಇದು ನೆನೆಗುದಿಗೆ ಬಿದ್ದಿತ್ತು. ಇದೀಗ ಈ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈ ಹಿಂದೆ ಪೊಲೀಸ್‌ ಇಲಾಖೆಯಲ್ಲಿ ಮಾತ್ರ ಕ್ರೀಡಾ ಸಾಧಕರಿಗೆ ಉದ್ಯೋಗದಲ್ಲಿ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡಲಾಗಿತ್ತು. ಇದೀಗ ಪೊಲೀಸ್‌ ಮತ್ತು ಅರಣ್ಯ ಇಲಾಖೆಗಳಲ್ಲಿ ಶೇ.3ರಷ್ಟು ಹುದ್ದೆಗಳನ್ನು ಹಾಗೂ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಸಾಧಕ ಕ್ರೀಡಾಪಟುಗಳಿಗೆ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡುವ ಕುರಿತು ಕರಡು ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರವೇ ಈ ಕುರಿತು ಅಂತಿಮ ಅಧಿಸೂಚನೆ ಹೊರಡಿಸಲಾಗುವುದು ಎಂದರು.

 

ಒಲಂಪಿಕ್ಸ್, ಪ್ಯಾರಾ ಒಲಿಂಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ ಗಳಲ್ಲಿ ಪದಕ ವಿಜೇತ ನಾಡಿನ 12 ಮಂದಿ ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿ ಪತ್ರ ವಿತರಿಸಲಾಗಿದೆ. ಕ್ರೀಡಾ ಸಾಧಕರನ್ನು ಗುರುತಿಸಿ ಪ್ರೋತ್ಸಾಹ ನೀಡುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲು ಬದ್ಧವಾಗಿದೆ. ಯುವ ಸಬಲೀಕರಣ ಇಲಾಖೆಯಲ್ಲಿ ಸಾಧಕ ಕ್ರೀಡಾಪಟುಗಳು ಹಾಗೂ ಅವರನ್ನು ರೂಪಿಸಿದ ತರಬೇತುದಾರರು ಮತ್ತು ದೈಹಿಕ ಶಿಕ್ಷಣ ಪರಿಣಿತರಿಗೂ ನೇಮಕಾತಿಗೆ ಅವಕಾಶ ಕಲ್ಪಿಸಿ ಭರ್ತಿ ವೃಂದ ಮತ್ತು ನೇಮಕಾತಿ ನಿಯಮ ರೂಪಿಸಲಾಗಿದೆ. ನೇಮಕಾತಿಗಾಗಿ ಕ್ರೀಡಾ ಸಾಧಕರಿಂದ ಆನ್‌ಲೈನ್‌ ಮೂಲಕ ಅರ್ಜಿ ಕರೆಯಲಾಗಿತ್ತು. ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯ ಸಮಿತಿಯು ಆಯ್ಕೆ ಮಾಡಿದೆ. ಕ್ರೀಡೆಗಳಲ್ಲಿ ಸಾಧನೆ ಮಾಡುವ ಮೂಲಕ ನೀವೆಲ್ಲರೂ ದೇಶಕ್ಕೆ ಕೀರ್ತಿ ತಂದಿದ್ದೀರಿ. ನಿಮ್ಮ ಸಾಧನೆ ಗುರುತಿಸಿ, ಪ್ರೋತ್ಸಾಹ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ವಿಶ್ವದಲ್ಲೇ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ನಮ್ಮದು. ಒಲಂಪಿಕ್ಸ್‌ ನಂತಹ ಕ್ರೀಡಾಕೂಟಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸ್ಪರ್ಧಿಸಬೇಕೆಂಬುವುದು ನಮ್ಮ ಉದ್ದೇಶ. ಇದಕ್ಕೆ ಪೂರಕವಾದ ವಾತಾವರಣವನ್ನು, ನೆರವನ್ನು ಸರ್ಕಾರ ಒದಗಿಸಲಿದೆ ಎಂದು ಅವರು ಇದೇ ವೇಳೆ ತಿಳಿಸಿದ್ರು.

ಇನ್ನು ಕಾರ್ಯಕ್ರಮದಲ್ಲಿ ಮುಖ್ಯಮoತ್ರಿ ಅವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿoದ ರಾಜು, ಯುವ ಸಬಲೀಕರಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮoಜುನಾಥ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.