ಮನೆ Latest News ಸಂಪುಟ ಪುನರ್ರಚನೆ ಹೈಕಮಾಂಡ್ ಗೆ ಬಿಟ್ಟಿದ್ದು ಎಂದ ಸಿಎಂ ಸಿದ್ದರಾಮಯ್ಯ

ಸಂಪುಟ ಪುನರ್ರಚನೆ ಹೈಕಮಾಂಡ್ ಗೆ ಬಿಟ್ಟಿದ್ದು ಎಂದ ಸಿಎಂ ಸಿದ್ದರಾಮಯ್ಯ

0

ಚಿಕ್ಕಮಗಳೂರು: ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್  ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಎನ್.ಆರ್.ಪುರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನರಸಿಂಹರಾಜಪುರದಲ್ಲಿ ಸೇತುವೆ ನಿರ್ಮಾಣ ಬಹುದಿನದ ಬೇಡಿಕೆಯಾಗಿತ್ತು.‌ ಈಗ ನನ್ನ ಅವಧಿಯಲ್ಲಿಯೇ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಾಗುತ್ತಿರುವುದು ಸಂತಸ ತಂದಿದೆ. ಬಿಜೆಪಿಯವರ ಅವಧಿಯಲ್ಲಿ ಸೇತುವೆ ನಿರ್ಮಾಣಕ್ಕೆ ಯಾವುದೇ ಕ್ರಮವಾಗಿರಲಿಲ್ಲ ಎಂದರು.

ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ಕಾರ್ಯ ಬಾಕಿಯಿದೆ. ಐದು ರಾಜ್ಯಗಳ ಚುನಾವಣೆ, ಬಜೆಟ್ ಅಧಿವೇಶನ  ಸಂಪುಟ ಪುನರ್ರಚನೆ ವಿಳಂಬಕ್ಕೆ ಕಾರಣವಿರಬಹುದು ಎಂದರು.

ಕಾಂಗ್ರೆಸ್ ನಲ್ಲಿ ಪಕ್ಷ ವಿರೋಧಿಗಳ ರಾಜಿನಾಮೆ ಪರ್ವ ಆರಂಭವಾಗಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರು ಇದುವರೆಗೆ ರಾಜಿನಾಮೆ ನೀಡಿಲ್ಲ. ನೀಡಬಹುದೇನೋ ಎಂದರು.

ಕಾಂಗ್ರೆಸ್ ಪಕ್ಷ ಸೋಲನ್ನು ಒಪ್ಪಿಕೊಂಡಿಲ್ಲ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದು ಖಂಡಿತ.  ತಲೆದಂಡಕ್ಕೆ ಚುನಾವಣೆಯ ಸೋಲು ಗೆಲುವು ಕಾರಣವಲ್ಲ. ಸಲೀಂ ಅಹ್ಮದ್ ಅವರು ಪಕ್ಷದ ಮುಖಂಡರು. ಅವರು, ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಕೆಲವರ ಪಕ್ಷವಿರೋಧಿ ಕಾರ್ಯಗಳ ಬಗ್ಗೆ  ಹೇಳಿಕೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆಯೇ ಹೊರತು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರಾಜಿತವಾಗಲಿದೆ ಎಂದು ಅವರು ಹೇಳಿರುವುದಿಲ್ಲ. ಪಕ್ಷವಿರೋಧಿ ಚಟುವಟಿಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದರು.

ಮಲೆನಾಡಿನಲ್ಲಿ ರೆಸಾರ್ಟ್ ಗಳಿಗೆ ಬೇಕಾಬಿಟ್ಟಿಯಾಗಿ ಅನುಮತಿ ನೀಡುತ್ತಿರುವ ಸರ್ಕಾರ, ಅರಣ್ಯವಾಸಿಗಳಿಗೆ  ಹಕ್ಕು ಪತ್ರ ನೀಡುತ್ತಿಲ್ಲ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಅರಣ್ಯ ಇಲಾಖೆಯಿಂದ ಹಕ್ಕು ಪತ್ರ ನೀಡುವುದೂ ಸೇರಿದಂತೆ ಹಲವು ವಿಷಯದ ಬಗ್ಗೆ ಸಧ್ಯದಲ್ಲಿಯೇ ಸಭೆ ನಡೆಸಲಾಗುವುದು ಎಂದರು.

ಪ್ರವಾಸಿಗರಿಗೆ ಕರ್ನಾಟಕ ಸುರಕ್ಷಿತ ತಾಣವಲ್ಲ ಎಂದು ಕೇರಳ ರಾಜ್ಯದಿಂದ ಟೀಕೆಗಳು ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇರಳ ರಾಜ್ಯದ ಬಾಲಕಿ ಚಿಕ್ಕಮಗಳೂರಿಗೆ ಬಂದು ಮೃತಪಟ್ಟಿರುವ ವಿಷಯ ತನಿಖೆಯಾಗಲಿದೆ. ಆದರೆ ಕರ್ನಾಟಕ ರಾಜ್ಯ ಪ್ರವಾಸಿಗರಿಗೆ ಸುರಕ್ಷಿತವಲ್ಲ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದರು.