ಬೆಂಗಳೂರಿನ ವಿಲ್ಸನ್ ಗಾರ್ಡನ್ ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾನಿಗೀಡಾಗಿರುವ ಮನೆಗಳ ದುರಸ್ತಿಗೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ.
ಸಿಲಿಂಡರ್ ಸ್ಫೋಟದಲ್ಲಿ ಹಾನಿಗೀಡಾಗಿರುವ ಮನೆಗಳನ್ನು ಕೂಡಲೇ ದುರಸ್ತಿ ಮಾಡಿಕೊಡುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಲಾಗಿದೆ. ಒಂಭತ್ತು ಜನ ಗಾಯಗೊಂಡಿದ್ದು ಓರ್ವ ಬಾಲಕ ಸಾವನ್ನಪ್ಪಿದ್ದಾನೆ ಎಂದು ಒಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಘಟನಾ ಸ್ಥಳ ಆಡುಗೋಡಿ ಬಳಿಯ ಚಿನ್ನಯ್ಯನ ಪಾಳ್ಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದರು.ದುರದೃಷ್ಟಕರ ಘಟನೆ ನಡೆದಿದೆ. ಮೇಲ್ನೋಟಕ್ಕೆ ಸಿಲಿಂಡರ್ ಸ್ಫೋಟವಾಗಿರಬಹುದು ಎಂದು ಕಂಡು ಬಂದಿದೆ. ಪೊಲೀಸರು ಹಾಗೂ ಬಿಬಿಎಂಪಿಯವರ ವರದಿಯೂ ಕೂಡ ಅದೇ ಹೇಳಿದೆ. ಇಲ್ಲಿನ ಜನ ಸಣ್ಣ ಸಣ್ಣ ಮನೆಗಳಲ್ಲಿ ವಾಸ ಮಾಡುತ್ತಿದ್ದಾರೆ. ಕಸ್ತೂರಮ್ಮ ಅವರಿಗೆ ಸುತ್ತ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನರಸಮ್ಮ, ಫಾತಿಮಾ, 38 ವರ್ಷದ ಪ್ರಮೀಳಾ,ರಾಜೇಶ್ (40 ವರ್ಷ), ಸಂಜಯ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಮುಬಾರಕ್ ಎಂಬ ಬಾಲಕ ತೀರಿಕೊಂಡಿದ್ದಾನೆ. ಸಬ್ರಿನಾ ಬಾನು, ಕಯಾಲಾ, ಇಂದಿರಾಗಾಂಧಿ ಆಸ್ಪತ್ರೆಯಲ್ಲಿದ್ದು, ಸುಬ್ರಮಣಿ (62 ವರ್ಷ) ಅಗಡಿ ಆಸ್ಪತ್ರೆ, ಶೇಖಾ, ನಜೀದುಲ್ಲಾ,(37 ವರ್ಷ) ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಸಿಲಿಂಡರ್ ಸ್ಪೋಟದಲ್ಲಿ ಸಾವನ್ನಪ್ಪಿದ ಬಾಲಕನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ
ಇನ್ನು ಸ್ಪೋಟದಲ್ಲಿ ಸಾವನ್ನಪ್ಪಿದ ಬಾಲಕನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಸುತ್ತ ಗಾಯಗಳಾಗಿರುವ ಕಸ್ತೂರಮ್ಮ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. 13 ಮನೆಗಳು ಹಾನಿಗೀಡಾಗಿದ್ದು ಅದನ್ನು ದುರಸ್ತಿ ಮಾಡಲಾಗುವುದು. ನರಸಮ್ಮ ಬದುಕುಳಿಯುವ ಸಾಧ್ಯತೆಗಳಿವೆ ಎಂದು ಸಿಎಂ ಭರವಸೆ ನೀಡಿದ್ದಾರೆ.
ಪೊಲೀಸರು, ಅಗ್ನಿ ಶಾಮಕ ದಳ, ಗೃಹ ಇಲಾಖೆಯವರು ಪರಿಶೀಲಿಸುತ್ತಿದ್ದು, ತ್ಯಾಜ್ಯ ವಿಲೇವಾರಿಯಾದ ನಂತರ ವರದಿ ಬಂದ ಮೇಲೆ ಘಟನೆಗೆ ನಿಜವಾದ ಕಾರಣ ತಿಳಿಯಲಿದೆ. ಮೇಲ್ನೋಟಕ್ಕೆ ಸಿಲಿಂಡರ್ ಸ್ಫೋಟವಾಗಿದೆ ಎಂದು ಅವರು ತಿಳಿಸಿದ್ದಾರ.











