ಬೆಂಗಳೂರು; ಎಚ್ಎಂಟಿ ಅರಣ್ಯ ಭೂಮಿ ಐಎ ವಿವಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿವೃತ್ತ ಐಎಎಸ್, ಹಾಲಿ ಐಎಫ್ಎಸ್ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ಸಂದೀಪ್ ದವೆ, ವಿಜಯಕುಮಾರ್ ಗೋಗಿ, ಸ್ಮಿತಾ ಬಿಜ್ಜೂರ್, ಆರ್.ಗೋಕುಲ್ ಗೆ ನೋಟಿಸ್ ಜಾರಿ ಮಾಡಲಾಗಿದೆ.
ಎಚ್ಎಂಟಿ ವಶದಲ್ಲಿರುವ ಅರಣ್ಯ ಭೂಮಿ, ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಡಿನೋಟಿಫಿಕೇಷನ್ ಗೆ ಅನುಮತಿ ಕೋರಿ ನಿವೃತ್ತ ಐಎಎಸ್ ಅಧಿಕಾರಿ ಮತ್ತು ಮೂವರು ಐ.ಎಫ್.ಎಸ್. ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದರು. ಇದೀಗ ಐಎಫ್ಎಸ್ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಮಾಡಿ ಮಾಡಲಾಗಿದೆ.
ಎಚ್ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರ ಜಮೀನು .ಇದು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಕೇವಲ ಅಧಿಕಾರಿಗಳ ಮಟ್ಟದಲ್ಲೇ ನಿರ್ಧಾರ ಕೈಗೊಳ್ಳಲಾಗಿತ್ತು. ಸುಪ್ರೀಂಕೋರ್ಟ್ ಗೆ ಮೇಲಿನ ಐಎಫ್ಎಸ್ ಅಧಿಕಾರಿಗಳು ಐ.ಎ. ಸಲ್ಲಿಸಿದ್ದರು. ಅರ್ಜಿ ಸಲ್ಲಿಸುವ ಪೂರ್ವದಲ್ಲಿ ಅಂದಿನ ಅರಣ್ಯ ಸಚಿವರ ಅಥವಾ ಸಚಿವ ಸಂಪುಟದ ಪೂರ್ವಾನುಮತಿಯನ್ನೂ ಪಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸಿ ಸಾವಿರಾರು ಕೋಟಿ ರೂ. ಬೆಲೆ ಬಾಳುವ ಭೂಮಿಯನ್ನು ಡಿ ನೋಟಿಫೈ ಮಾಡಲು ಐಎ ಸಲ್ಲಿಸಿದ ಅಧಿಕಾರಿಗಳೇ ಕಾರಣ.ಹೀಗಾಗಿ ಕಾರಣ ಕೇಳಿ ನೋಟಿಸ್ ನೀಡುವಂತೆ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದರು. ಸಚಿವ ಈಶ್ವರ್ ಖಂಡ್ರೆ ಸೆಪ್ಟೆಂಬರ್ 24ರಂದು ಸೂಚನೆ ನೀಡಿದ್ದರು.ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾಗಿ ನಿವೃತ್ತರಾಗಿರುವ ಸಂದೀಪ್ ದವೆ, ನಿವೃತ್ತ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಗೋಗಿ ಹಾಗೂ ಹಾಲಿ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾಗಿರುವ ಐಟಿಸಿ ವಿಭಾಗದ ಸ್ಮಿತಾ ಬಿಜ್ಜೂರ್, ತಾಂತ್ರಿಕ ಕೋಶದ ಆರ್. ಗೋಕುಲ್ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.
ಸುಪ್ರೀಂಕೋರ್ಟ್ ಹೇಳಿರುವಂತೆ “Once a forest is always a forest unless it is de-notified’. ಅಂದರೆ ಅನ್ಯ ಉದ್ದೇಶಕ್ಕೆ ಭೂ ಪರಿವರ್ತನೆ ಆಗದ ಹೊರತು ಒಮ್ಮೆ ಅರಣ್ಯ ಎಂದು ನಮೂದಾದ ಭೂಮಿ ಎಂದೆಂದಿಗೂ ಅರಣ್ಯವೇ ಆಗಿರುತ್ತದೆ. ಹೀಗಾಗಿ ಅರಣ್ಯ ಸಂರಕ್ಷಣಾ ಕಾಯಿದೆ 1980ರಡಿ ಅರಣ್ಯ ಭೂಮಿಯನ್ನು ಅರಣ್ಯೇತರ ಬಳಕೆಗೆ ಪರಿಹಾರ ಭೂಮಿ ಒದಗಿಸುವುದರೊಂದಿಗೆ ಎನ್.ಪಿ.ವಿ.ಮೊತ್ತ ಪಾವತಿಸಿ ಕಡ್ಡಾಯವಾಗಿ ಅನುಮತಿ ಪಡೆಯಬೇಕಾಗುತ್ತದೆ. ಹೀಗೆ ಅನುಮತಿ ನೀಡಿದರೂ ಸಹ ಅರಣ್ಯ ಭೂಮಿಯನ್ನು ಗುತ್ತಿಗೆ ಮಾತ್ರ ನೀಡಿ, ಗುತ್ತಿಗೆ ಅವಧಿ ಮುಗಿದ ಬಳಿಕ ಅರಣ್ಯ ಇಲಾಖೆಗೆ ಮರಳಿ ಪಡೆಯಬೇಕಾಗುತ್ತದೆ ಎಂದು ನೋಟಿಸ್ ನಲ್ಲಿ ಪ್ರಸ್ತಾಪ ಮಾಡಲಾಗಿದೆ.
ಆದರೆ, ಎಚ್.ಎಂ.ಟಿ. ತನ್ನ ವಶದಲ್ಲಿರುವ ಅರಣ್ಯ ಭೂಮಿಯನ್ನು ವಿವಿಧ ಸರ್ಕಾರಿ, ಖಾಸಗಿ ಸಂಸ್ಥೆ, ವ್ಯಕ್ತಿಗಳಿಗೆ ಭಾಗಶಃ ಮಾರಾಟ ಮಾಡಿದೆ.ಇದು ಕೇಂದ್ರ ಹಾಗೂ ರಾಜ್ಯ ಸರ್ಕಾರ ರೂಪಿಸಿರುವ ಪರಿಸರ ಮತ್ತು ಅರಣ್ಯ ಸಂರಕ್ಷಣೆ ಹಾಗೂ ಕಂದಾಯ ಕಾಯಿದೆ, ನಿಯಮಾವಳಿಗಳ ಸ್ಪಷ್ಟ ಉಲ್ಲಂಘನೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.