ಬೆಂಗಳೂರು; ಸಚಿವ ಪ್ರಿಯಾಂಕ ಖರ್ಗೆ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಗೆ ಮತ್ತೆ ಟ್ವೀಟ್ ಮೂಲಕ ಟಾಂಗ್ ಕೊಟ್ಟಿದ್ದಾರೆ. ನಿಮ್ಮನ್ನು ಕಡೆಗಣಿಸಿದ್ದನ್ನು, ತಮಗಾದ ಅವಮಾನವನ್ನು, ನಿರ್ಲಕ್ಷ್ಯವನ್ನು ನಾನು ಜನರ ಮುಂದೆ ತೆರೆದಿಟ್ಟಿದ್ದಕ್ಕೆ ಈ ಕಾರ್ಯಕ್ರಮದಲ್ಲಿ ಕೊನೆ ಕ್ಷಣದಲ್ಲಿ ನಿಮಗೆ ಸ್ಥಾನ ಮತ್ತು ಕೊಂಚ ಮಾನ ದೊರಕಿದೆ. ಇದಕ್ಕಾಗಿ ನೀವು ನನಗೆ ಧನ್ಯವಾದಗಳನ್ನು ಹೇಳಬೇಕು! ಎಂದಿದ್ದಾರೆ.
ಆಡಳಿತ ಪಕ್ಷದವರ ಟೀಕೆಗೆ ಆಹಾರವಾಗುತ್ತಿದೆ ದಯಮಾಡಿ ಹೆಸರು ಸೇರಿಸಿ ಎಂದು ಕೇಂದ್ರ ಸರ್ಕಾರದ ಕೈಕಾಲು ಹಿಡಿದು ಬೇಡಿಕೊಂಡು ಹೆಸರು ಸೇರ್ಪಡೆಗೆ ಶ್ರಮಿಸಿದ ನಿಮ್ಮ ಬೆಂಬಲಿಗರಿಗೂ ನೀವು ಧನ್ಯವಾದ ಹೇಳಬೇಕು!. ರಾತ್ರೋ ರಾತ್ರಿ ಹೆಸರು ಸೇರಿಸಿಕೊಂಡು ನಿಮ್ಮ ಬೆನ್ನನ್ನು ನೀವೇ ತಟ್ಟಿಕೊಳ್ಳುತ್ತಾ ಮೈಮರೆಯಬೇಡಿ. ಏನೇ ಮಾಡಿದರೂ ನಿಮ್ಮ ಜೂನಿಯರ್ ವಿಜಯೇಂದ್ರರಿಗಿಂತ ನೀವು ಕೆಳಗೇ ಇದ್ದೀರಿ. ಈ ಹೆಸರು ಸೇರ್ಪಡೆ ನಿಮಗೆ ದೊರಕಿದ ಸಮ್ಮಾನವಲ್ಲ ಭಿಕ್ಷೆ ಅಷ್ಟೇ.ಮೆಟ್ರೋ ಕಾರ್ಯಕ್ರಮದಲ್ಲಿ ಮಾತ್ರ ನಿಮಗೆ ಜಾಗ. ವಂದೇ ಭಾರತ್ ರೈಲಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ನಿಮಗೆ ಕುರ್ಚಿ ಇಲ್ಲ. ಶಿಕಾರಿಪುರದ ಶಾಸಕ ವಿಜಯೇಂದ್ರರಿಗೆ ಮಾತ್ರ ಕುರ್ಚಿ. ಪಾಪ ನೀವು….! ಎಂದಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಗೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ತಿರುಗೇಟು ಕೊಟ್ಟಿದ್ದಾರೆ. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ 83 ವರ್ಷದ ಇಳಿ ವಯಸ್ಸಿನಲ್ಲೂ 55 ವರ್ಷದ ಚಿರಯುವಕ, ನಾಲಾಯಕ್ ರಾಹುಲ್ ಗಾಂಧಿ ಅವರೇ ನಮ್ಮ ನಾಯಕ ಎಂದು ಸಲಾಮು ಹೊಡೆದುಕೊಂಡು ಓಡಾಡುವ ದುಸ್ಥಿತಿ ನಿಮ್ಮ ತಂದೆ ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರಬಾರದಿತ್ತು. ತಮ್ಮ ಮಕ್ಕಳಿಗೆಲ್ಲಾ ಪ್ರಿಯದರ್ಶಿನಿ, ಪ್ರಿಯಾಂಕ, ರಾಹುಲ್ ಎಂದು ಹೆಸರಿಟ್ಟು ನಕಲಿ ಗಾಂಧಿ ಕುಟುಂಬಕ್ಕೆ ಎಷ್ಟು ನಿಷ್ಠರಾಗಿದ್ದರೂ ಕರ್ನಾಟಕದ ಅತ್ಯಂತ ಹಿರಿಯ ನಾಯಕರಾದ ನಿಮ್ಮ ತಂದೆಯವರಿಗೆ ಮುಖ್ಯಮಂತ್ರಿ ಸ್ಥಾನ ಇಲ್ಲ ಎಂದಿದ್ದಾರೆ.
ನಿಮ್ಮ ತಂದೆ ಎಐಸಿಸಿ ಅಧ್ಯಕ್ಷರು ಎಂದು ನಿಮ್ಮ ಬೆನ್ನು ನೀವೇ ತಟ್ಟಿಕೊಳ್ಳುತ್ತಾ ಮೈಮರೆಯಬೇಡಿ, ಸಮಾಧಾನವೂ ಪಟ್ಟುಕೊಳ್ಳಬೇಡಿ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ನಾನು ಎಐಸಿಸಿ ಅಧ್ಯಕ್ಷ ಆಗುವುದಿಲ್ಲ ಎಂದು ನಕಲಿ ಗಾಂಧಿ ಕುಟುಂಬಕ್ಕೆ ಸೆಡ್ಡು ಹೊಡೆದಿದ್ದಕ್ಕೆ ಅನಿವಾರ್ಯವಾಗಿ ನಿಮ್ಮ ತಂದೆಯವರನ್ನು ನಾಮಕಾವಸ್ತೆ ಎಐಸಿಸಿ ಅಧ್ಯಕ್ಷ ಸ್ಥಾನದಲ್ಲಿ ಒಲ್ಲದ ಮನಸ್ಸಿನಿಂದ ತಂದು ಕೂರಿಸಿದ್ದಾರೆ. ಒಂದು ನೆನಪಿಟ್ಟುಕೊಳ್ಳಿ. ಏನೇ ಮಾಡಿದರೂ ನೀವು ಮತ್ತು ನಿಮ್ಮ ಕುಟುಂಬ, ನಕಲಿ ಗಾಂಧಿ ಕುಟುಂಬಕ್ಕಿಂತ, ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗಿಂತ ಕೆಳಗೇ ಇದ್ದೀರಿ, ಮುಂದೆಯೂ ಇರುತ್ತೀರಿ. ಒಂದು ವೇಳೆ ಕಾಂಗ್ರೆಸ್ ಪಕ್ಷ ಉಳಿದರೆ, ಬಹುಶಃ ಭವಿಷ್ಯದಲ್ಲೂ ತಾವು ಪ್ರಿಯಾಂಕಾ ಗಾಂಧಿ ಅವರ ಮಕ್ಕಳಿಗೆ ಸಲಾಮು ಹೊಡೆದುಕೊಂಡು ಜೇವನ ಸಾಗಿಸಬೇಕಾಗಬಹುದು.ನಿಮಗೆ ಸಿಕ್ಕಿರುವ ಸಚಿವ ಸ್ಥಾನವೂ ನಿಮಗೆ ದೊರಕಿದ ಸಮ್ಮಾನವಲ್ಲ ಅಥವಾ ನಿಮ್ಮ ಪ್ರತಿಭೆಗೆ ಸಿಕ್ಕ ಅವಕಾಶವಲ್ಲ . ಅದು ನಿಮ್ಮ ತಂದೆಯವರನ್ನು ಸಮಾಧಾನ ಪಡಿಸುವ ಸಮಾಧಾನಕರ ಬಹುಮಾನ ಅಷ್ಟೇ ಎಂದು ತಿಳಿಸಿದ್ದಾರೆ.