ಬೆಳಗಾವಿ ಸುವರ್ಣ ಸೌಧದಲ್ಲಿ ಅನುಭವ ಮಂಟಪದ ತೈಲವರ್ಣ ಚಿತ್ರದ ಅನಾವರಣ ನಡೆಯಿತು. ಸಿಎಂ ಸಿದ್ದರಾಮಯ್ಯ ತೈಲ ಚಿತ್ರವನ್ನು ಅನಾವರಣಗೊಳಿಸಿದರು.
ಅನಾವರಣ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಗೃಹಸಚಿವ ಡಾ. ಜಿ ಪರಮೇಶ್ವರ್,ಸಿಎಂ ಸಿದ್ದರಾಮಯ್ಯ, ಆರ್ ಅಶೋಕ್, ಯುಟಿ ಖಾದರ್, ಎಚ್ ಕೆ ಪಾಟೀಲ್ ಲಕ್ಷ್ಮಿ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ, ಕೃಷ್ಣ ಭೈರೇಗೌಡ ರುದ್ರಪ್ಪ ಲಮಾಣಿ, ಪ್ರಿಯಾಂಕ್ ಖರ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಇತರೆ ಸಚಿವರು ಶಾಸಕರು ಉಪಸ್ಥಿತರಿದ್ದರು.
ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೊದಲ ಮಹಡಿಯಲ್ಲಿ ತೈಲವರ್ಣದ ಚಿತ್ರದ ಅಳವಡಿಕೆ ಮಾಡಲಾಗಿದೆ. ೨೦ ಅಡಿ ಉದ್ದ ೧೦ ಅಡಿ ಅಗಲದ ಅನುಭವ ಮಂಟಪದ ಚಿತ್ರ ಇದಾಗಿದೆ. ಮೊದಲ ಸಂಸತ್ತು ಅನುಭವ ಮಂಟಪ ಎಂಬ ಪರಿಕಲ್ಪನೆಯೊಂದಿಗೆ ತೈಲವರ್ಣದ ಚಿತ್ರ ಅನಾವರಣ ಮಾಡಲಾಗಿದೆ.
ಇನ್ನು ಅನುಭವ ಮಂಟಪದ ತೈಲಚಿತ್ರದ ಅನಾವರಣ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅನುಭವ ಮಂಟಪದ ತೈಲಚಿತ್ರದ ಅನಾವರಣ ನನ್ನ ಕೈಯಿಂದ ಆಗಿರುವುದು ನನ್ನ ಸೌಭಾಗ್ಯ ಎಂದು ಭಾವಿಸಿದ್ದೇನೆ. 12 ನೇ ಶತಮಾನದಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ, ಮನುಷ್ಯ ಶೋಷಣೆಯ ವ್ಯವಸ್ಥೆ ಹೋಗಲಾಡಿಸಿ, ಜಾತಿರಹಿತ ಸಮ ಸಮಾಜ ತರಬೇಕು ಎನ್ನುವ ಉದ್ದೇಶದಿಂದ ಬಸವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನು ಮಾಡಿದರು. ಮೇಲು-ಕೀಳು ಇದ್ದರೆ, ಮನುಷ್ಯ ತಾರತಮ್ಯ ಇದ್ದರೆ ಅದು ಧರ್ಮ ಆಗಲು ಸಾಧ್ಯವಿಲ್ಲ. ದಯೆಯೇ ಧರ್ಮದ ಮೂಲ ಎಂದು ಅವಿದ್ಯಾವಂತರಿಗೂ ಅರ್ಥ ಆಗುವಂತೆ ಶರಣರು ಧರ್ಮವನ್ನು ಬೋಧಿಸಿದ್ದರು. ಮದುವೆ ಕೂಡ ಜಾತಿ ಆಧಾರದಲ್ಲಿ ಏರ್ಪಡಿಸಲಾಗುತ್ತಿತ್ತು. ವ್ಯಕ್ತಿಯ ಯೋಗ್ಯತೆಯನ್ನು ಜಾತಿ, ವರ್ಣ ವ್ಯವಸ್ಥೆ ಆಧಾರದ ಮೇಲೆ ನಿರ್ಧಾರ ಆಗುತ್ತಿತ್ತು. ಪ್ರತಿಭೆ ಕೂಡ ಯೋಗ್ಯತೆ ಆಧಾರದ ಮೇಲೆ ನಿರ್ಧಾರ ಆಗದೆ ಜಾತಿ ಆಧಾರದಲ್ಲಿ ನಿರ್ಧರಿಸಲಾಗುತ್ತಿತ್ತು. ಜಾತಿ ವ್ಯವಸ್ಥೆಯಿಂದ ಲಾಭ ಪಡೆಯುತ್ತಿರುವ ಪಟ್ಟ ಭದ್ರರು ಜಾತಿ ವ್ಯವಸ್ಥೆಯ ಅಸಮಾನತೆಯನ್ನು ಪೋಷಿಸುತ್ತಿದ್ದಾರೆ ಎಂದರು.
ಹುಟ್ಟುವಾಗ ಎಲ್ಲರೂ ವಿಶ್ವ ಮಾನವರೇ ಎಂದು ಕುವೆಂಪು ಹೇಳಿದರೆ, ಕುಲ ಕುಲವೆಂದು ಬಡಿದಾಡದಿರಿ ಎಂದು ಕನಕದಾಸರು ಹೇಳಿದ್ದಾರೆ. ಇವತ್ತಿನ ವಿಧಾನಸಭೆ, ಇವತ್ತಿನ ಪಾರ್ಲಿಮೆಂಟೇ ಅವತ್ತಿನ ಅನುಭವ ಮಂಟಪ. ಅತ್ಯಂತ ಕೆಳ ಸಮುದಾಯದ ಅಲ್ಲಮಪ್ರಭು ಅವರು ಅದರ ಅಧ್ಯಕ್ಷರಾಗಿದ್ದರು. ಎಲ್ಲಾ ಜಾತಿಯ ಪ್ರತಿನಿಧಿಗಳು, ಮಹಿಳಾ ಪ್ರತಿನಿಧಿ ಶರಣ ಶರಣೆಯರೂ ಅನುಭವ ಮಂಟಪದ ಸದಸ್ಯರಾಗಿದ್ದರು. ಬುದ್ಧನ ಕಾಲದಲ್ಲೂ ಈ ರೀತಿಯ ಸರ್ವ ಜಾತಿ , ಸರ್ವ ಧರ್ಮದ ಪ್ರತಿನಿಧಿಗಳನ್ನು ಒಳಗೊಂಡ ಮಂಟಪಗಳಿದ್ದವು ಎಂದು ಚರಿತ್ರೆಯಲ್ಲಿ ಓದಿದ್ದೇವೆ. ಹೀಗಾಗಿ ಅಂಬೇಡ್ಕರ್ ಅವರ ಮಾತು, ‘” ಇತಿಹಾಸ ತಿಳಿಯದವರು ಇತಿಹಾಸ ಸೃಷ್ಟಿಸಲಾರರು” ಎನ್ನುವ ಮಾತನ್ನು ಸ್ಮರಿಸಬೇಕು. ಶೂದ್ರರು ಮತ್ತು ಮಹಿಳೆಯರಿಗೆ ಶಿಕ್ಷಣವನ್ನು ನಿಷೇಧಿಸಲಾಗಿತ್ತು. ಈ ನಿಷೇಧ ಬಸವಾದಿ ಶರಣರ ಕಾಲದಲ್ಲಿ ಇರಲಿಲ್ಲ. ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ನಮ್ಮ ಸಮಾಜ ಚಲನೆ ರಹಿತವಾಗಿದೆ ಎಂದು ರಾಮ ಮನೋಹರ ಲೋಹಿಯಾ ಅವರು ಹೇಳಿದ್ದರು. ಆರ್ಥಿಕ ಮತ್ತು ಸಾಮಾಜಿಕ ಚಲನೆ ಸಿಕ್ಕಾಗ ಮಾತ್ರ ಸಮಾಜದ ಚಲನೆ ಸಾಧ್ಯ. ಜಾತಿ ವ್ಯವಸ್ಥೆ ಬಾವಿಯೊಳಗಿನ ಕಸದಂತೆ. ನೀರು ಸೇದಲು ಕೊಡ ಬಾವಿಗಿಳಿಸಿ ಕದಕಿದಾಗ ಕಸ ಪಕ್ಕಕ್ಕೆ ಸರಿಯುತ್ತದೆ. ನೀರು ಸೇದಿದ ಬಳಿಕ ಮತ್ತೆ ಕಸ ಆವರಿಸಿಕೊಳ್ಳುತ್ತದೆ. ಇದೇ ಜಾತಿ ವ್ಯವಸ್ಥೆ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು ಜಾತಿ ಮೀರಿದ ಸಾಮಾಜಿಕ ವ್ಯವಸ್ಥೆ ರೂಪಿಸಲು ಶ್ರಮಿಸಿದ್ದರು. ಅವರ ಶ್ರಮಕ್ಕೆ ಪ್ರತೀಕವಾದ ಅನುಭವ ಮಂಟಪದ ತೈಲಚಿತ್ರವನ್ನು ಇಂದು ಅನಾವರಣಗೊಳಿಸಿದ್ದು ಅತ್ಯಂತ ಸಂತೋಷದ ವಿಚಾರ ಎಂದರು.
ಇನ್ನು ಇದೇ ವೇಳೆ ಸುವರ್ಣ ವಿಧಾನಸೌಧದಲ್ಲಿ ಗಾಂಧಿ ಅಧಿವೇಶನ ಶತಮಾನೋತ್ಸವ ಲೋಗೋ ಬಿಡುಗಡೆ ಮಾಡಲಾಯಿತು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಲೋಗೋ ಬಿಡುಗಡೆ ಮಾಡಿದರು.